ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣದ ಬಿಡುಗಡೆ ಕುರಿತು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ವಿಷಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ‘ಈವರೆಗೆ 21 ಕಂತುಗಳ ಗೃಹಲಕ್ಷ್ಮಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಿದ್ದೇವೆ. ಸುಮಾರು 1 ಕೋಟಿ 24 ಲಕ್ಷ ಮಹಿಳೆಯರು ನಮ್ಮ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ’ ಎಂದರು.
ಅದೇ ರೀತಿ ‘ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು’ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಇದೇ ಸಂದರ್ಭದಲ್ಲಿ, ಕಾರ್ಕಳ ತಾಲೂಕು ಬೈಲೂರಿನ ನೀರೆ ಕಣಜಾರು ಗ್ರಾಮ ಪಂಚಾಯತ್ನ ಹೊಸ ಆಡಳಿತ ಕಟ್ಟಡ ಗ್ರಾಮ ಸೌಧದ ಉದ್ಘಾಟನೆಗೆ ಮುನ್ನ ಪತ್ರಿಕಾಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಶೀಘ್ರದಲ್ಲೇ “ಅಕ್ಕ” ಪಡೆಯನ್ನು ರಚಿಸಲಾಗುವುದು. ಇದು ವ್ಯವಸ್ಥಿತ ರೀತಿಯಲ್ಲಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ’ ಎಂದರು.
‘ಮಹಿಳಾ ಪೊಲೀಸರು ಮತ್ತು ಎನ್.ಸಿ.ಸಿ. ತರಬೇತಿ ಪಡೆದವರು ಈ ತಂಡದಲ್ಲಿ ಸೇವೆ ಸಲ್ಲಿಸಲಿದ್ದಾರೆ. ಪ್ರತಿ ತಾಲೂಕಿಗೆ ಒಂದು ಪಡೆ ನಿಯೋಜಿಸಲಾಗುವುದು. ತರಬೇತಿ ಮತ್ತು ಆಯುಧಗಳ ವ್ಯವಸ್ಥೆ ಮಾಡಲಾಗುವುದು. ಬಸ್ ನಿಲ್ದಾಣಗಳು, ಜಾತ್ರೆಗಳು ನಡೆಯುವ ಪ್ರದೇಶಗಳಲ್ಲಿ ಹೆಲ್ಪ್ ಲೈನ್ ಸ್ಥಾಪಿಸಲಾಗುವುದು. ಮೂರು ತಿಂಗಳೊಳಗೆ ಈ ಪಡೆ ಸಿದ್ಧತೆ ಪೂರ್ಣಗೊಳ್ಳಲಿದೆ’ ಎಂದರು.
ಅಲ್ಲದೆ, ‘ಪ್ರತಿ ಮನೆಗಳಲ್ಲಿ ನಡೆಯುವ ದೌರ್ಜನ್ಯವನ್ನು ತಡೆಗಟ್ಟಬೇಕು. ಮನೆಯೊಳಗೆ ನಡೆಯುವ ಅನ್ಯಾಯಗಳಿಗೆ “ಅಕ್ಕ” ಪಡೆ ಪ್ರತಿಕ್ರಿಯಿಸಲಿದೆ’ ಎಂದರು.
ರಾಜ್ಯದಲ್ಲಿ ಅಂಗನವಾಡಿಗಳು ಪ್ರಾರಂಭವಾಗಿ 50 ವರ್ಷಗಳು ಪೂರ್ಣಗೊಂಡಿದ್ದು, 50 ವರ್ಷಗಳ ಹಿಂದೆ ಇಂದಿರಾ ಗಾಂಧಿ ಅವರು ಈ ಕಲ್ಪನೆಯನ್ನು ಆರಂಭಿಸಿದ್ದರು. ಮೈಸೂರಿನ ಟಿ. ನರಸೀಪುರದಲ್ಲಿ ಅಂಗನವಾಡಿ ಪ್ರಾರಂಭಿಸಲಾಗಿತ್ತು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.