2008ರಲ್ಲಿ ಹಾವೇರಿಯಲ್ಲಿ ನಡೆದ ಗೋಲಿಬಾರ್ಗೆ ಬಲಿಯಾದ ರೈತರ ಸ್ಮರಣಾರ್ಥ ಜೂನ್ 10ರಂದು ರೈತ ಹುತಾತ್ಮ ದಿನಾಚರಣೆ. ಬೆಳೆ ವಿಮೆ ಪರಿಹಾರ, ರಸಗೊಬ್ಬರ ದರ ನಿಯಂತ್ರಣ ಹಾಗೂ ವರದಾ-ಬೇಡ್ತಿ ನದಿ ಜೋಡಣೆಗಾಗಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ. ಸಂಪೂರ್ಣ ವರದಿ.
ಹಾವೇರಿ: ಕೃಷಿ ಪ್ರಧಾನ ಜಿಲ್ಲೆಯಾಗಿರುವ ಹಾವೇರಿಯಲ್ಲಿ ರೈತರ ಹಕ್ಕೊತ್ತಾಯಗಳ ದನಿ ಮತ್ತೆ ಮೊಳಗುತ್ತಿದೆ. ಮಳೆಯ ಕೊರತೆ, ಬೆಳೆ ವಿಮೆಯಲ್ಲಿನ ಅನ್ಯಾಯ ಹಾಗೂ ಗಗನಕ್ಕೇರುತ್ತಿರುವ ರಸಗೊಬ್ಬರ ಬೆಲೆಗಳಿಂದ ಕಂಗೆಟ್ಟಿರುವ ಅನ್ನದಾತರು, ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ಹಾವೇರಿಯಲ್ಲಿ 2008ರಲ್ಲಿ ನಡೆದ ಕರಾಳ ಗೋಲಿಬಾರ್ ಘಟನೆಯಲ್ಲಿ ಪ್ರಾಣ ಕಳೆದುಕೊಂಡ ರೈತರ ಸ್ಮರಣಾರ್ಥ ಪ್ರತಿ ವರ್ಷದಂತೆ ಈ ವರ್ಷವೂ ಜೂನ್ 10 ರಂದು ‘ರೈತ ಹುತಾತ್ಮ ದಿನಾಚರಣೆ’ಯನ್ನು ಹಮ್ಮಿಕೊಳ್ಳಲಾಗಿದ್ದು, ಅಂದೇ ಸರ್ಕಾರದ ವಿರುದ್ಧ ನಿರ್ಣಾಯಕ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರೆ ನೀಡಿದೆ.
2008ರ ಗೋಲಿಬಾರ್: ಕರಾಳ ದಿನದ ನೆನಪು
2008ರಲ್ಲಿ ಹಾವೇರಿಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಅಭಾವವನ್ನು ಖಂಡಿಸಿ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಡೆದ ಪೊಲೀಸ್ ಗೋಲಿಬಾರ್ ದಾಳಿಯಲ್ಲಿ ಶಿದ್ದಲಿಂಗಪ್ಪ ಚೂರಿ ಹಾಗೂ ಪುಟ್ಟಪ್ಪ ಹೊನ್ನತ್ತಿ ಎಂಬ ಇಬ್ಬರು ಮುಗ್ಧ ರೈತರು ಹುತಾತ್ಮರಾಗಿದ್ದರು. ಅವರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವ ನಿಟ್ಟಿನಲ್ಲಿ ಜೂನ್ 10 ರಂದು ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಬಾರಿಯ ಆಚರಣೆಯ ಜೊತೆಗೆ ಸರ್ಕಾರದ ಕಣ್ಣು ತೆರೆಸುವ ನಿಟ್ಟಿನಲ್ಲಿ ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಇಂದಿನಿಂದ ವಿದ್ಯಾರ್ಥಿಗಳ ರಿಯಾಯಿತಿ ಬಸ್ ಪಾಸ್ ಅರ್ಜಿ ಆರಂಭ; ಮೊಬೈಲ್ನಲ್ಲೇ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ರೈತರ ಪ್ರಮುಖ ಬೇಡಿಕೆಗಳು ಹಾಗೂ ಆಕ್ರೋಶವೇನು?
ಹಾವೇರಿ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ರೈತರಿಗೆ ಯಾವುದೇ ಭದ್ರತೆ ಇಲ್ಲದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
- ಮಳೆ ಕೊರತೆ ಮತ್ತು ಬಿತ್ತನೆ ಆತಂಕ: ರೈತರು ಸಾಲಸೂಲ ಮಾಡಿ ಹೊಲದಲ್ಲಿ ಬೀಜ ಬಿತ್ತಿದ್ದಾರೆ. ಆದರೆ, ಮಳೆ ಪ್ರಮಾಣ ಕಡಿಮೆಯಾಗುತ್ತಿರುವುದು ರೈತರನ್ನು ತೀವ್ರ ಆತಂಕಕ್ಕೆ ತಳ್ಳಿದೆ.
- ಏಕರೂಪದ ಬೀಜದ ದರ: ಮಕ್ಕೆಜೋಳ (ಮೆಕ್ಕೆಜೋಳ) ಬಿತ್ತನೆ ಬೀಜಕ್ಕೆ ಎಲ್ಲಾ ಕಂಪನಿಗಳು ಒಂದೇ ದರ ನಿಗದಿಮಾಡಬೇಕು. ಜೊತೆಗೆ ರಸಗೊಬ್ಬರದ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ತಕ್ಷಣವೇ ನಿಯಂತ್ರಿಸಬೇಕು.
- ಬೆಳೆ ವಿಮೆಯಲ್ಲಿ ಅನ್ಯಾಯ: 2025-26ನೇ ಸಾಲಿನ ಬೆಳೆ ವಿಮೆ ಪರಿಹಾರ ಹಂಚಿಕೆಯಲ್ಲಿ ರೈತರಿಗೆ ಸಾಕಷ್ಟು ಅನ್ಯಾಯವಾಗಿದೆ. ಜಿಲ್ಲೆಗೆ ಅಂದಾಜು 80 ರಿಂದ 90 ಕೋಟಿ ರೂ. ಬೆಳೆ ವಿಮೆ ಹಣ ಬರಬೇಕಿದೆ. ಕೂಡಲೇ ಇದರ ಮರುಪರಿಶೀಲನೆ ನಡೆಸಿ ರೈತರಿಗೆ ನ್ಯಾಯ ಒದಗಿಸಬೇಕು.
- ವಿದ್ಯುತ್ ಖಾಸಗೀಕರಣಕ್ಕೆ ವಿರೋಧ: ರೈತರ ಪಂಪ್ಸೆಟ್ಗಳಿಗೆ ಆಧಾರವಾಗಿರುವ ವಿದ್ಯುತ್ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಸರ್ಕಾರ ಮುಂದಾಗಿದ್ದು, ಇದರಿಂದ ರೈತರಿಗೆ ಭಾರಿ ಅನ್ಯಾಯವಾಗಲಿದೆ. ಇದನ್ನು ಕೈಬಿಡಬೇಕು.
ವರದಾ-ಬೇಡ್ತಿ ನದಿ ಜೋಡಣೆ: ಸಂಸದ ಬೊಮ್ಮಾಯಿಗೆ ತರಾಟೆ
ರೈತರ ಜೀವನಾಡಿಯಾಗಬಲ್ಲ ವರದಾ-ಬೇಡ್ತಿ ನದಿ ಜೋಡಣೆಯ (Varada-Bedthi River Linking) ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ಬೊಟ್ಟು ಮಾಡುತ್ತಿವೆ ಎಂದು ರೈತ ಮುಖಂಡರು ಕಿಡಿಕಾರಿದರು.
“ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರು ನದಿ ಜೋಡಣೆ ವಿಚಾರದಲ್ಲಿ ನಾನೇ ಮುಂದೆ ನಿಂತು ಕೇಂದ್ರ ಸರ್ಕಾರದ ಜೊತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ, ಈಗ ಅವರು ಈ ಬಗ್ಗೆ ಧ್ವನಿಯೆತ್ತುತ್ತಿಲ್ಲ. ರಾಜಕೀಯ ಮಾಡುವುದನ್ನು ಬದಿಗಿಟ್ಟು, ವರದಾ-ಬೇಡ್ತಿ ನದಿ ಜೋಡಣೆ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸಬೇಕು” ಎಂದು ಮಲ್ಲಿಕಾರ್ಜುನ ಬಳ್ಳಾರಿ ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಗತಿಸಿವೆ. ಆದರೆ, ಆಡಳಿತ ಪಕ್ಷದ ನಾಯಕರು ಕೇವಲ ಅಧಿಕಾರದ ಕಚ್ಚಾಟದಲ್ಲಿ ಮುಳುಗಿದ್ದು, ರೈತರನ್ನು ಸಂಪೂರ್ಣವಾಗಿ ಮರೆತಿದ್ದಾರೆ. ರಸಗೊಬ್ಬರ ಮಾರಾಟದಲ್ಲಿನ ಕಪ್ಪುಹಣ ಮತ್ತು ಅಭಾವಕ್ಕೆ ಕೃಷಿ ಇಲಾಖೆಯ ನಿರ್ಲಕ್ಷ್ಯವೇ ನೇರ ಕಾರಣ. ಜಿಲ್ಲೆಯಲ್ಲಿ ನದಿಯಿಂದ ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆಗಳು ಸಂಪೂರ್ಣವಾಗಿ ನೆನೆಗುದಿಗೆ ಬಿದ್ದಿವೆ” ಎಂದು ಆರೋಪಿಸಿದರು.
ಇದನ್ನೂ ಓದಿ: ಮುಂಗಾರು ಬಿತ್ತನೆಗೆ ಸಿದ್ಧತೆ: ಹೊಳಗುಂದಿ ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಆರಂಭ.
ಜೂನ್ 10ರ ಹೋರಾಟಕ್ಕೆ ಬನ್ನಿ

ಈ ಎಲ್ಲಾ ಜ್ವಲಂತ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಜೂನ್ 10 ರಂದು ಹಾವೇರಿ ನಗರದ ಸಿದ್ದಪ್ಪ ಸರ್ಕಲ್ ಹತ್ತಿರ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲಾ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮುಖಂಡರು ಕರೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಮಾಲತೇಶ ಆಲದಕಟ್ಟೆ, ಹೆಚ್.ಹೆಚ್. ಮುಲ್ಲಾ, ಮರಿಗೌಡ ಪಾಟೀಲ, ರಾಜು ತರ್ಲಗಟ್ಟ, ಸುರೇಶ ಚಲವಾದಿ, ಚನ್ನಪ್ಪ ಮರಡೂರು, ಶಿವಯೋಗಿ ಹೊಸಗೌಡ್ರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ವರದಿ: ಮಾರುತಿ ತಳವಾರ, ನೀಡ್ಸ್ ಆಫ್ ಪಬ್ಲಿಕ್
ಇದೇ ರೀತಿಯ ನಿಖರ ಸುದ್ದಿಗಳಿಗೆ ನಮ್ಮ ನೀಡ್ಸ್ ಪಬ್ಲಿಕ್ ಆಪ್ ಡೌನ್ಲೋಡ್ App ಮಾಡಿ
ಈ ಮಾಹಿತಿಗಳನ್ನು ಓದಿ:

ಮಾರುತಿ ತಳವಾರ್ ಅವರು ‘Needs of Public’ ಜಾಲತಾಣದ ಹಾವೇರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಬಿಎ, ಬಿ.ಎಡ್ ಹಾಗೂ ಪತ್ರಿಕೋದ್ಯಮದಲ್ಲಿ ಎಂ.ಎ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಬರುವ ಮೊದಲು ಸುಮಾರು ಐದು ವರ್ಷಗಳ ಕಾಲ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು, ಸಮಾಜಮುಖಿ ವಿಚಾರಗಳು ಮತ್ತು ಜನಪರ ಸಮಸ್ಯೆಗಳ ಕುರಿತು ವಿಶೇಷ ಆಸಕ್ತಿ ಹೊಂದಿದ್ದಾರೆ.
ಸ್ಥಳೀಯ ಆಡಳಿತ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಕೃಷಿ ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಆಧರಿಸಿದ ವರದಿಗಳನ್ನು ಸಿದ್ಧಪಡಿಸುವಲ್ಲಿ ಅನುಭವ ಹೊಂದಿರುವ ಇವರು, ನಿಖರ ಮತ್ತು ವಿಶ್ವಾಸಾರ್ಹ ಮಾಹಿತಿಯನ್ನು ಓದುಗರಿಗೆ ತಲುಪಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಹಾವೇರಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಪ್ರಮುಖ ಬೆಳವಣಿಗೆಗಳು, ಜನಸಮಸ್ಯೆಗಳು ಹಾಗೂ ನೆಲಮಟ್ಟದ ಸುದ್ದಿಗಳನ್ನು ವರದಿ ಮಾಡುವಲ್ಲಿ ವಿಶೇಷ ಒಲವು ಹೊಂದಿದ್ದಾರೆ.


WhatsApp Group





Leave a Reply